Pages

Wednesday, January 07, 2015

ಕೆ ಎಸ ನರಸಿಂಹ ಸ್ವಾಮಿಯವರ ಮೈಸೂರು ಮಲ್ಲಿಗೆ ಸಂಕಲನದ ಬಳೆಗಾರ ಚೆನ್ನಯ್ಯ ಕವನ



ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು
ಒಳಗೆ ಬರಲಪ್ಪಣೆಯೆ ದೊರೆಯೇ
ನವಿಲೂರ ಮನೆಯಿಂದ ನುಡಿಯೊಂದ ತಂದಿಹೆನು
ಬಾಳೆಯ ತೊಡಿಸುವುದಿಲ್ಲ ನಿಮಗೆ

ಮುಡಿದ ಮಲ್ಲಿಗೆಯರಳು ಬಾಡಿಲ್ಲ ರಾಯರೇ
ತೌರಿನಲಿ ತಾಯಿ ನಗುತಿಹರು
ಕುಡಿದ ನೀರಲುಗಿಲ್ಲ ಕೊರಗದಿರಿ ರಾಯರೇ
ಅಮ್ಮನಿಗೆ ಬಳೆಯಾ ತೊಡಿಸಿದರು

ಅಂದು ಮಂಗಳವಾರ ನವಿಲೂರ ಕೇರಿಯಲಿ
ಓಲಗದ  ಸದ್ದು ತುಂಬಿತ್ತು.
ಬಳೆಯ ತೊಡಿಸಿದರಂದು ಅಮ್ಮನಿಗೆ ತೌರಿನಲಿ
ಅಂಗಳದ ತುಂಬಾ ಜನವಿತ್ತು

ಹಬ್ಬದೂಟವನುಂಡು  ಹಸೆಗೆ ಬಂದರು ತಾಯಿ
ಕೊರಳಿನಲ್ಲಿ ಹೊಳೆದಿತ್ತು ಪದಕ
ಒಬ್ಬರೇ ಹಸೆಗೆ ಬಂದರು ತಾಯಿ ಬಿಂಕದಲಿ
ಕಣ್ತುಂಬಾ ನೋಡಿದೆನು ಮುದುಕ

ಸಿರಿಗೌರಿಯಂತೆ ಬಂದರು ತಾಯಿ ಹಸೆಮಣೆಗೆ
ಸೆರಗಿನಲಿ ಕಣ್ಣೀರನೊರೆಸಿ;
ಸುಖದೊಳಗೆ ನಿಮ್ಮ ನೆನೆದರು ತಾಯಿ ಗುಣವಂತೆ
ದೀಪದಲಿ ಬಿಡುಗಣ್ಣ ನಿಲಿಸಿ

ಬೇಕಾದ ಹಣ್ಣಿಹುದು ಹೂವಿಹುದು ತೌರಿನಲಿ
ಹೊಸ ಸೀರೆ ರತ್ನದಾಭರಣ;
ತಾಯಿ ಕೊರಗುವರಲ್ಲಿ ನೀವಿಲ್ಲದೂರಿನಲಿ
ನಿಮಗಿಲ್ಲ ಒಂದು ಹನಿ ಕರುಣ

ದಿನವಾದ ಬಸುರಿ ಉಸ್ಸೆಂದು ನಿಟ್ಟುಸಿರನೆಳೆದು
ಕುಡಿಯಬಾರದು ನನ್ನ ದೊರೆಯೇ
ಹಿಂಡಬಾರದು ದುಂಡು ಮಲ್ಲಿಗೆಯ ದಂಡೆಯನು
ಒಣಗಬಾರದು ಒಡಲ ಚಿಲುಮೆ

ಮುನಿಸು ಮಾವನ ಮೇಲೆ ಮಗಳೇನ ಮಾಡಿದಳು
ನಿಮಗೇತಕೀ ಕಲ್ಲು ಮನಸು
ಹೋಗಿ ಬನ್ನಿರಿ ಒಮ್ಮೆ ಕೈ ಮುಗಿದು ಬೇಡುವೆನು
ಅಮ್ಮನಿಗೆ ನಿಮ್ಮದೇ ಕನಸು

No comments:

Post a Comment